Tel: 7676775624 | Mail: info@yellowandred.in

Language: EN KAN

    Follow us :


ಮೇಕೆದಾಟು ಯೋಜನೆ ಕೇಂದ್ರ ಒಪ್ಪಿಗೆ, ಇಚ್ಛಾಶಕ್ತಿ ಪ್ರದರ್ಶಿಸುತ್ತಾ ರಾಜ್ಯ ಸರ್ಕಾರ

Posted date: 28 Nov, 2018

Powered by:     Yellow and Red

ಮೇಕೆದಾಟು ಯೋಜನೆ ಕೇಂದ್ರ ಒಪ್ಪಿಗೆ, ಇಚ್ಛಾಶಕ್ತಿ ಪ್ರದರ್ಶಿಸುತ್ತಾ ರಾಜ್ಯ ಸರ್ಕಾರ

ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಪ್ರಾಥಮಿಕ ಹಂತದ ಅನುಮತಿ ದೊರಕಿದ್ದು, ಯೋಜನೆಯ ರೂಪುರೇಷೆಗಳನ್ನು ಶೀಘ್ರವಾಗಿ ತಲುಪಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಮೇಕೆದಾಟು ಯೋಜನೆ ಕುರಿತ ರಾಜ್ಯದ ಪ್ರಿ-ಫೀಸಿಬಿಲಿಟಿ ವರದಿಗೆ ಕೇಂದ್ರದ ಜಲ ಸಂಪನ್ಮೂಲ ಇಲಾಖೆ ಒಪ್ಪಿಗೆ ನೀಡಿದ್ದು, ಸಮಗ್ರ ಯೋಜನಾ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಕೇಂದ್ರ ನಿರ್ದೇಶನ ನೀಡಿದೆ.

ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಬೇಡಿ ಎಂದು ಅಂದಿನಿಂದಲೂ ಪ್ರಧಾನಿಗಳಿಗೆ  ತಮಿಳುನಾಡು ಮುಖ್ಯಮಂತ್ರಿಗಳೆಲ್ಲರೂ ಪತ್ರ ಬರೆದು ಒತ್ತಡ ಹೇರಿಕೊಂಡೇ ಬಂದಿದ್ದಾರೆ. ಇಂದು ಸಹ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತಮಿಳು ನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಕರ್ನಾಟಕ ರಾಜ್ಯದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ನೀಡಬಾರದೆಂದು ಪತ್ರ ಬರೆದಿದ್ದಾರೆ.

ಮೇಕೆದಾಟು ಹೆಸರು ಹೇಗೆ ಬಂತು..?

ಮೇಕೆದಾಟು ಎಂದರೇನು ಎಂದು ಕೇಳಿದರೆ ಸಿಗುವ ಉತ್ತರ ಪಿಕ್ನಿಕ್ ಸ್ಪಾಟ್. ಬೆಂಗಳೂರಿನಿಂದ 90 ಕಿ.ಮೀ ದೂರದ ರಾಮನಗರ ಜಿಲ್ಲೆಯಲ್ಲಿರುವ ಸ್ಥಳವೇ ಮೇಕೆದಾಟು. ಕಾವೇರಿ ಮತ್ತು ಅರ್ಕಾವತಿ ನದಿಗಳ ಸಂಗಮ ಸ್ಥಳದಿಂದ 4 ಕಿಲೋಮೀಟರ್ ದೂರದಲ್ಲಿದೆ ಮೇಕೆದಾಟು. ಇಲ್ಲಿ ಕಾವೇರಿ ನದಿ ಮೇಕೆ ಹಾರಿ ದಾಟುವಷ್ಟು ಕಿರು ಜಾಗದಲ್ಲಿ ಹರಿದು ಆಳವಾದ ಕಂದಕಕ್ಕೆ ಧುಮುಕುತ್ತದೆ. ಇಲ್ಲಿಗೆ ಮೇಕೆದಾಟು ಎಂಬ ಹೆಸರು ಬರಲು ಒಂದು ಕಥೆಯೇ ಇದೆ. ನೂರಾರು ವರ್ಷಗಳ ಹಿಂದೆ ಇಲ್ಲಿ ಕುರಿಗಾಹಿಯೊಬ್ಬ ತನ್ನ ಮೇಕೆಗಳನ್ನು ಮೇಯಿಸುತ್ತ ಇದ್ದನಂತೆ. ನೂರಾರು ಮೇಕೆಗಳು ಒಂದೆಡೆ ಮೇಯುತ್ತಾ ಇದ್ದರೆ ಒಂದು ಮೇಕೆ ಮಾತ್ರ ಒಬ್ಬಂಟಿಯಾಗಿ ಓಡಾಡುತ್ತ ಸೊಪ್ಪು ತಿನ್ನುತ್ತಾ ಇತ್ತು. ಈ ಸಮಯದಲ್ಲಿ ಬೇಟೆಯಾಡಲು ಬಂದಿದ್ದ ಒಂದು ಹುಲಿ ಒಬ್ಬಂಟಿಯಾಗಿ ಸೊಪ್ಪು ತಿನ್ನುತ್ತಿದ್ದ ಮೇಕೆಯನ್ನು ನೋಡಿ ಅದರ ಮೇಲೆ ದಾಳಿ ನಡೆಸಿತು. ಆದರೆ ಹುಲಿಯಿಂದ ತಪ್ಪಿಸಿಕೊಂಡ ಮೇಕೆ ನದಿಯ ಪಾತ್ರದಲ್ಲಿ ಕಿರಿದಾದ ಸೇತುವೆಯಂತಿದ್ದ ಕಲ್ಲಿನ ಮೇಲೆ ಹಾರಿ ಆಚೆ ದಡವನ್ನು ಸೇರಿ ಪ್ರಾಣ ಉಳಿಸಿಕೊಂಡಿತ್ತು, ಅಂದಿನಿಂದ ಈ ಸ್ಥಳವನ್ನು ಮೇಕೆದಾಟು ಎಂದು ಕರೆಯಲಾಗುತ್ತದೆ.

ಮೇಕೆದಾಟು ಯೋಜನೆ ಏನು ಎತ್ತ?

ಮೇಕೆದಾಟು ಬಳಿ ಕುಡಿಯುವ ನೀರಿನ ಯೋಜನೆಗಾಗಿ ಕಾವೇರಿ ನದಿಗೆ ಅಡ್ಡಲಾಗಿ ಕಿರು ಅಣೆಕಟ್ಟು ಕಟ್ಟಲು ಕರ್ನಾಟಕ ಸರ್ಕಾರ ಮುಂದಾಗಿದೆ. ಕಾವೇರಿ ನದಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ಬಾರಿಯೂ ಕ್ಯಾತೆ ತೆಗೆಯುವ ತಮಿಳುನಾಡು ಯೋಜನೆ ವಿರೋಧಿಸಿ ಪ್ರಧಾನಿಯವರಿಗೂ ಪತ್ರ ಬರೆದಿದಿದ್ದಲ್ಲದೇ ಸುಪ್ರೀಂ ಕೋರ್ಟ್‍ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಈ ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದೆ.

ಕರ್ನಾಟಕ ಸರ್ಕಾರ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಿಸಲು ಹೊರಟ್ಟಿದ್ದು ಯಾಕೆ?

ಕಾವೇರಿ ನ್ಯಾಯಾಧೀಕರಣ ತೀರ್ಪಿನಂತೆ ಕರ್ನಾಟಕ ಸರ್ಕಾರ ಪ್ರತಿವರ್ಷ 192 ಟಿಎಂಸಿ ನೀರನ್ನು ತಮಿಳುನಾಡಿಗೆ ಮಂಡ್ಯದಲ್ಲಿರುವ ಕೃಷ್ಣರಾಜಸಾಗರ ಜಲಾಶಯದಿಂದ ಬಿಡುಗಡೆ ಮಾಡುತ್ತದೆ. ಈ ನೀರಿನ ಜೊತೆಗೆ ಹೆಚ್ಚುವರಿಯಾಗಿ ಒಂದು ಅಂದಾಜಿನ ಪ್ರಕಾರ 80, 90 ಟಿಎಂಸಿ ನೀರು ತಮಿಳುನಾಡಿಗೆ ಸೇರುತ್ತದೆ. ಹೀಗೆ ರಾಜ್ಯದಿಂದ ಹರಿದು ಹೋಗುತ್ತಿರುವ ಈ ನೀರನ್ನು ಸಂಗ್ರಹಿಸಿ ಬೆಂಗಳೂರು ನಗರವೂ ಸೇರಿದಂತೆ ಬಯಲುಸೀಮೆಯ ಜಿಲ್ಲೆಗಳಿಗೆ ಪೂರೈಕೆ ಮಾಡಲು ಕರ್ನಾಟಕ ಸರ್ಕಾರ ಅಣೆಕಟ್ಟು ನಿರ್ಮಿಸಲು ಹೊರಟಿದೆ.

ತಮಿಳರು ಪ್ರತಿಭಟಿಸಲು ಕಾರಣವೇನು?

ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬೇಕೆಂಬ ಪ್ರಸ್ತಾಪ 1952ರಲ್ಲೇ ಚಿಗುರೊಡೆದಿತ್ತು. ಆದರೆ ಕೆಲ ಕಾರಣಗಳಿಂದ ಈ ಯೋಜನೆಯನ್ನು ಸರ್ಕಾರ ಕೈಬಿಟ್ಟಿತ್ತು. 1996ರಲ್ಲಿ ಮೇಕೆದಾಟುವಿನಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿ ಕೇಂದ್ರ ವಿದ್ಯುತ್ ಪ್ರಾಧಿಕಾರಕ್ಕೆ ಅನುಮೋದನೆಗೆ ಕಳುಹಿಸಿಕೊಟ್ಟಿತ್ತು. ಆದರೆ ಇದೇ ಸಮಯದಲ್ಲಿ ಕಾವೇರಿ ವಿವಾದ ನ್ಯಾಯಾಧಿಕರಣ ಮುಂದೆ ಇದ್ದ ಕಾರಣ ಮೊದಲು ಈ ವಿವಾದವನ್ನು ಬಗೆಹರಿಸಿಕೊಳ್ಳಿ, ನಂತರ ಈ ವಿಚಾರವನ್ನು ಪ್ರಸ್ತಾಪ ಮಾಡಿ ಎಂದು ಹೇಳುವ ಮೂಲಕ ವಿದ್ಯುತ್ ಪ್ರಾಧಿಕಾರ ಉಪಾಯದಿಂದ ಜಾರಿಕೊಂಡಿತ್ತು. 2007ರಲ್ಲಿ ನ್ಯಾಯಾಧಿಕರಣ ಅಂತಿಮ ತೀರ್ಪು ಪ್ರಕಟಿಸಿದ ಬಳಿಕ ಮತ್ತೆ ಮೇಕೆದಾಟು ಯೋಜನೆ ಗರಿಗೆದರತೊಡಗಿತು. ಅಂತಿಮವಾಗಿ 2013ರಲ್ಲಿ ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ನಿರ್ಮಿಸಲು ಮಹತ್ವದ ಹೆಜ್ಜೆ ಇಟ್ಟಿತು. ರಾಜ್ಯ ಸರ್ಕಾರ ಅಣೆಕಟ್ಟು ನಿರ್ಮಿಸಲು ಮುಂದಾಗುತ್ತಿದ್ದಂತೆ ಆಗಿನ ತಮಿಳುನಾಡು ಸಿಎಂ ಜಯಲಲಿತಾ ಕೇಂದ್ರದ ಮೊರೆ ಹೋಗಿ, ಸುಪ್ರೀಂನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದರು. ಆದರೆ ಈಗ ಕರ್ನಾಟಕ ಸರ್ಕಾರ ಮೇಕೆದಾಟು ಸಮಗ್ರ ಯೋಜನೆ(ಡಿಪಿಆರ್) ತಯಾರಿಸಲು ಜಾಗತಿಕ ಟೆಂಡರ್ ಕರೆದಿದೆ. ಅಷ್ಟೇ ಅಲ್ಲದೇ ಬಜೆಟ್‍ನಲ್ಲಿ ಡಿಪಿ ಆರ್ ಗೆ 25 ಕೋಟಿ ರೂ.ಹಣವನ್ನು ಸರ್ಕಾರ ಮೀಸಲಿಟ್ಟಿದೆ. ಡಿಪಿಆರ್ ತಯಾರಿಸಲು ಮುಂದಾಗುತ್ತಿರುವುದು ತಮಿಳುನಾಡು ರೈತರ ಮತ್ತು ರಾಜಕೀಯ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದು ಕರ್ನಾಟಕದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.

ತಮಿಳುನಾಡು ವಾದ ಏನು?

ಕಾವೇರಿ ನ್ಯಾಯಾಧೀಕರಣದಲ್ಲಿ ನೀರು ಹಂಚಿಕೆ ವಿಚಾರಣೆ ನಡೆಯುವ ವೇಳೆ ಮೇಕೆದಾಟು ವಿಚಾರ ಪ್ರಸ್ತಾಪವಾಗಿಲ್ಲ. ಆದರೆ ಸರ್ಕಾರ ಈಗ ಯೋಜನೆಗೆ ಮುಂದಾಗಿದ್ದು ನ್ಯಾಯಾಮಂಡಳಿಯ ತೀರ್ಪನ್ನು ಉಲ್ಲಂಘಿಸಿದೆ. ತಮಿಳುನಾಡಿಗೆ ನೈಸರ್ಗಿಕವಾಗಿಯೇ ಮಳೆ ಮೂಲಕ ಹೆಚ್ಚುವರಿ ನೀರು ಬರುತ್ತದೆ. ಅದರೆ ಈ ಅಣೆಕಟ್ಟು ನಿರ್ಮಿಸುವ ಮೂಲಕ ಕರ್ನಾಟಕ ತಮಿಳುನಾಡಿನ ರೈತರ ಕೃಷಿಗೆ ಅಡ್ಡಗಾಲು ಹಾಕುತ್ತಿದೆ.

ಕರ್ನಾಟಕದ ವಾದ ಏನು?

ಕಾವೇರಿ ನ್ಯಾಯಾಧೀಕರಣದ ತೀರ್ಪಿನ ಪ್ರಕಾರ ಪ್ರತಿವರ್ಷ 192 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುವುದು ನಮ್ಮ ಹೊಣೆ. ಒಂದು ವೇಳೆ ನಾವು ಅಷ್ಟು ಪ್ರಮಾಣದ ನೀರನ್ನು ಬಿಡದಿದ್ದರೆ ತಮಿಳುನಾಡು ಪ್ರಶ್ನಿಸುವುದು ಸರಿ. ನಾವು ಕುಡಿಯುವ ನೀರಿಗಾಗಿ ಡ್ಯಾಂ ಕಟ್ಟುತ್ತೇವೆಯೇ ಹೊರತು ವಿದ್ಯುತ್ ಉತ್ಪಾದನೆಗೆ ಅಲ್ಲ. ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕಿದೆಯೆಂದು ಅಂತಾರಾಷ್ಟ್ರೀಯ ಜಲ ನೀತಿಯೇ ಹೇಳಿದೆ. ಹೀಗಾಗಿ ನಾವು ಎತ್ತಿಕೊಂಡ ಮೇಕೆದಾಟು ಯೋಜನೆ ನ್ಯಾಯ ಸಮ್ಮತವಾಗಿದೆ.

ಕರ್ನಾಟಕಕ್ಕೆ ಮೇಕೆದಾಟು ಅತ್ಯವಶ್ಯಕ ಯಾಕೆ?

ಬೆಂಗಳೂರು ನಗರಕ್ಕೆ ನೀರು ಬರುವುದು ಕೆ ಆರ್ ಎಸ್ ಡ್ಯಾಂನಿಂದ. ಮಳೆಗಾಲದಲ್ಲಿ ಡ್ಯಾಂ ಭರ್ತಿಯಾದರೆ ಬೆಂಗಳೂರು ಜನತೆಗೆ ನೀರು ಭಾಗ್ಯ. ಬೆಂಗಳೂರು ನಗರಕ್ಕೆ ಪ್ರತಿದಿನ 1400 ದಶಲಕ್ಷ ಲೀಟರ್ ನೀರು ಅಗತ್ಯವಿದೆ. ಬೇಸಿಗೆ ಸಮಯದಲ್ಲಿ ನೀರಿನ ಬೇಡಿಕೆ ಶೇ.15ರಷ್ಟು ಹೆಚ್ಚಾಗುತ್ತದೆ. ತಿಪ್ಪಗೊಂಡನಹಳ್ಳಿ ಜಲಾಶಯದಿಂದ 2012ರಲ್ಲಿ ನೀರು ಬಿಡುಗಡೆ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಬೆಂಗಳೂರಿನ ನೀರಿನ ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಇಲ್ಲಿ ಸಂಗ್ರಹವಾದ ಡ್ಯಾಂ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗೆ ಬಳಸುವ ಉದ್ದೇಶ ರಾಜ್ಯ ಸರ್ಕಾರದ್ದು.

ಎಷ್ಟು ಡ್ಯಾಂ ನಿರ್ಮಾಣವಾಗಲಿದೆ?

ಆರಂಭಿಕ ಯೋಜನೆ ಪ್ರಕಾರ 4,500 ಎಕರೆ ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಮುಳುಗಡೆಯಾಗುವ ಪ್ರದೇಶವನ್ನು ತಪ್ಪಿಸಲು 20 ಟಿಎಂಸಿ ಸಾಮಥ್ರ್ಯದ 2, 3 ಅಣೆಕಟ್ಟು ಕಟ್ಟುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದೆ. ಆದರೆ ಎಷ್ಟು ಡ್ಯಾಂ ನಿರ್ಮಾಣ ಮಾಡಬೇಕು ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಸ್ಥಳ ಪರಿಶೀಲನೆಯಾಗಿದ್ದು, ಸಮಗ್ರ ಯೋಜನಾ ವರದಿ ಸರ್ಕಾರದ ಕೈ ಸೇರಿದ ಬಳಿಕ ಎಷ್ಟು ಡ್ಯಾಂ ನಿರ್ಮಿಸಬೇಕು ಎನ್ನುವುದು ಅಂತಿಮವಾಗಲಿದೆ.

ಕಾವೇರಿ ನ್ಯಾಯಾಧೀಕರಣದ ಪ್ರಕಾರ ಕಾವೇರಿ ಯಾರಿಗೆ ಎಷ್ಟೆಷ್ಟು

ಕಾವೇರಿ ನ್ಯಾಯಾಧೀಕರಣ ರಚನೆಯಾಗಿದ್ದು 1990ರ ಜೂನ್ 6ರಂದು. ಆದರೆ ಅಂತಿಮ ತೀರ್ಪು ಪ್ರಕಟಿಸಿದ್ದು 2007ರ ಫೆಬ್ರವರಿ 2ರಂದು. ಅಂದರೆ ಸತತ ಹದಿನೇಳು ವರ್ಷಗಳ ತರುವಾಯ. ನ್ಯಾಯಮೂರ್ತಿ ಎನ್. ಪಿ. ಸಿಂಗ್ ನೇತೃತ್ವದ, ಎನ್. ಎಸ್. ರಾವ್ ಮತ್ತು ಸುಧೀರ್ ನಾರಾಯಣ್ ಅವರನ್ನೊಳಗೊಂಡ ಪ್ರಾಧಿಕಾರವು 2007ರಲ್ಲಿ ನೀಡಿದ ತೀರ್ಪಿನಲ್ಲಿ ಕಾವೇರಿ ಜಲಾನಯನದಲ್ಲಿ ಒಟ್ಟು 740 ಟಿಎಂಸಿ ನೀರು ಲಭ್ಯವಿದೆ ಎಂದು ತಿಳಿಸಿತ್ತು.

ಕರ್ನಾಟಕ ರಾಜ್ಯವು ನ್ಯಾಯಾಧೀಕರಣದ ಮುಂದೆ 27.28ಲಕ್ಷ ಎಕರೆ ನೀರಾವರಿ ಮತ್ತು ಬೆಂಗಳೂರು ಸೇರಿದಂತೆ ಎಲ್ಲಾ ಪಟ್ಟಣ ಪ್ರದೇಶಗಳ ಕುಡಿಯುವ ನೀರು, ವಿದ್ಯುತ್ ಮುಂತಾದವುಗಳಿಗೆ ಒಟ್ಟು 465 ಟಿ.ಎಂ.ಸಿ ನೀರಿನ ಬೇಡಿಕೆ ಮಂಡಿಸಿತ್ತು. ಆದರೆ ನ್ಯಾಯಮಂಡಳಿಯು ಈ ಎಲ್ಲಾ ಉದ್ದೇಶಕ್ಕಾಗಿ 270 ಟಿಎಂಸಿ ಮಾತ್ರ ಹಂಚಿಕೆ ಮಾಡಿದೆ. ತಮಿಳುನಾಡು 562 ಟಿಎಂಸಿ ನೀರಿಗೆ ಬೇಡಿಕೆ ಇಟ್ಟಿತ್ತು. ಆದರೆ ನ್ಯಾಯಮಂಡಳಿ 419 ಟಿಎಂಸಿ ಹಂಚಿಕೆ ಮಾಡಿದೆ. ಕೇರಳಕ್ಕೆ 30 ಟಿಎಂಸಿ ಮತ್ತು ಪುದುಚೇರಿಗೆ 7 ಟಿಎಂಸಿ ನೀರು ಹಂಚಿಕೆ ಸೂತ್ರದ ಮೂಲಕ ತೀರ್ಪನ್ನು ನೀಡಿತ್ತು. ತೀರ್ಪಿನ ಜೊತೆಗೆ ಪ್ರತಿ ವರ್ಷ ಜೂನ್ ತಿಂಗಳಿನಿಂದ ಏಪ್ರಿಲ್ ವರೆಗೆ 192 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಆದೇಶಿಸಿದೆ. ಇಷ್ಟು ಪ್ರಮಾಣದ ನೀರನ್ನು ಪ್ರತಿ ತಿಂಗಳು ವಾರದಲ್ಲಿ ನಿಗದಿತ ಪ್ರಮಾಣದಲ್ಲಿ ಬಿಡುಗಡೆ ಮಾಡಲು ಸೂಚಿಸಿದೆ.

(*ಮೇಕೆದಾಟು ಯೋಜನೆ ರೂಪುಗೊಳ್ಳಲು ಪರಮಪೂಜ್ಯ ಡಾ ಬಾಲಗಂಗಾಧರ ನಾಥ ಸ್ವಾಮೀಜಿಗಳ ಕೊಡುಗೆ ಬಹಳ ಇದೆ, ಅದೇ ರೀತಿ  ಪರಮಪೂಜ್ಯ ಡಾ ನಿರ್ಮಲಾನಂದ ಸ್ವಾಮೀಜಿಗಳು ಸಹ ಹೋರಾಟಗಾರರಿಗೆ ಮತ್ತು ಸರ್ಕಾರಕ್ಕೆ ಸೂಕ್ತ ಮಾರ್ಗದರ್ಶನ ನೀಡುತ್ತಾ ಬಂದಿದ್ದಾರೆ, ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರಕ್ಕೆ ಶೀಘ್ರವಾಗಿ ವರದಿ ಒಪ್ಪಿಸಿ ಯೋಜನೆಯನ್ನು ಕೈಗೆತ್ತಿಕೊಳ್ಳಲಿ.

ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಆದಿಚುಂಚನಗಿರಿ ಶಾಖಾ ಮಠ ರಾಮನಗರ

(*ರಾಜ್ಯದ ಜನತೆಗೆ ಅದರಲ್ಲೂ ಬಯಲುಸೀಮೆ ಮತ್ತು ಬೆಂಗಳೂರಿನ ನಾಗರೀಕರಿಗೆ ಆಳುವ ಸರ್ಕಾರಗಳೇನಾದರೂ ಒಂದು ಒಳ್ಳೆಯ ಕೊಡುಗೆ ನೀಡುತ್ತಾರೆಂದರೆ ಅದು ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಿ ಕುಡಿಯುವ ನೀರನ್ನು ಒದಗಿಸುವುದು, ಕೇವಲ ಸಬೂಬುಗಳನ್ನು ಹೇಳದೇ ಇಚ್ಛಾಶಕ್ತಿ ಪ್ರದರ್ಶಿಸಿ ಶೀಘ್ರ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಬೇಕಾಗಿದೆ.

ಸಿ ಪುಟ್ಟಸ್ವಾಮಿ
ಶಾಶ್ವತ ನೀರಾವರಿ ಹೋರಾಟ ಸಮಿತಿ

(*ಕರ್ನಾಟಕದ ಆಳುವ ಸರ್ಕಾರಗಳು ತಮಿಳುನಾಡು ಪ್ರಧಾನಮಂತ್ರಿಗಳಿಗೆ ಪತ್ರ ಬರೆಯುವುದನ್ನು, ಕೋಟ್೯ಗೆ ಮಧ್ಯಂತರ ಅರ್ಜಿ ಸಲ್ಲಿಸುವುದನ್ನು ಕೇಳಿಕೊಂಡು ಬೆದರು ಬೊಂಬೆಯಂತಾಗಿವೆ, ಕುಡಿಯುವ ನೀರಿಗಾಗಿ ಯಾವ ರಾಜ್ಯವೂ ಅಣೆಕಟ್ಟು ನಿರ್ಮಾಣ ಮಾಡಬಾರದು ಎಂದು ಕೇಂದ್ರ ಸರ್ಕಾರವಾಗಲಿ, ನ್ಯಾಯಾಲಯಗಳಾಗಲಿ ಎಲ್ಲಿಯೂ ಹೇಳಿಲ್ಲ.

ಕೇವಲ ಮಂತ್ರಿಮಹೋದಯರನ್ನು ಮಾತ್ರ ಸಭೆ ಕರೆಯದೇ ಆಯ್ದ ಕೆಲವು ನೀರಾವರಿ ತಜ್ಞರು, ತಿಳುವಳಿಕೆ ಉಳ್ಳ ರೈತ ಮುಖಂಡರು ಮತ್ತು ಕಾನೂನು ಪಂಡಿತರನ್ನು ಒಟ್ಟಿಗೆ ಸಭೆ ಸೇರಿಸಿ ಸೂಕ್ತ ತೀರ್ಮಾನಕ್ಕೆ ನಮಬರಬೇಕಾಗಿದೆ. ಮೊದಲು ಕೇಂದ್ರಕ್ಕೆ ವರದಿ ಸಲ್ಲಿಸಿ ಮೇಕೆದಾಟು ಯೋಜನೆಗೆ ಶೀಘ್ರವಾಗಿ ಶಿಲಾನ್ಯಾಸ ಮಾಡಿ ಕಾಮಗಾರಿ ಕೈಗೆತ್ತಿಕೊಂಡರೆ ಎಲ್ಲವೂ ಸರಿ ಹೋಗಲಿದೆ. ಇಲ್ಲಿ ಆಳುವ ನಾಯಕರು ಇಚ್ಛಾಶಕ್ತಿ ಪ್ರದರ್ಶಿಸಬೇಕಾಗಿದೆ ಅಷ್ಟೇ.

ಗೋ ರಾ ಶ್ರೀನಿವಾಸ... ಸಂಚಾಲಕರು
ಮೇಕೆದಾಟು ಅಣೆಕಟ್ಟು ನಿರ್ಮಾಣ ಹೋರಾಟ ಸಮಿತಿ.*)


ಗೋ ರಾ ಶ್ರೀನಿವಾಸ...
ಮೊ:9845856139.



 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑