Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲಾಸ್ಪತ್ರೆಗೆ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳನ್ನು ಒದಗಿಸಿ: ಡಾ. ಸಿ.ಎನ್.ಅಶ್ವತ್ಥ ನಾರಾಯಣ

Posted date: 29 Dec, 2020

Powered by:     Yellow and Red

ಜಿಲ್ಲಾಸ್ಪತ್ರೆಗೆ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳನ್ನು ಒದಗಿಸಿ: ಡಾ. ಸಿ.ಎನ್.ಅಶ್ವತ್ಥ ನಾರಾಯಣ

ರಾಮನಗರ:ಡಿ/29/20/ಮಂಗಳವಾರ. ಜಿಲ್ಲೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ 250 ಹಾಸಿಗೆ ಸಾಮರ್ಥ್ಯದ ಜಿಲ್ಲಾ ಆಸ್ಪತ್ರೆಗೆ ಅಗತ್ಯ ತಜ್ಞ ವೈದ್ಯರು, ವೈದ್ಯರು ಹಾಗೂ ಸಿಬ್ಬಂದಿಗಳನ್ನು ಆದ್ಯತೆ ಮೇರೆಗೆ ಒದಗಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಿಂದ ನಡೆಸಿದ ವಿಡಿಯೋ ಸಂವಾದದಲ್ಲಿ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದರು.


*ತಾಯಿ ಮತ್ತು ಮಕ್ಕಳ ಆಸ್ಪತ್ರೆ:* ಹಾಲಿ ರಾಮನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 100 ಹಾಸಿಗೆಗಳ ಜಿಲ್ಲಾಸ್ಪತ್ರೆಯನ್ನು ಪ್ರಸೂತಿ ಮತ್ತು ಮಕ್ಕಳ ಆಸ್ಪತ್ರೆಯಾಗಿ ಪರಿವರ್ತಿಸಿ ಕಾಯಕಲ್ಪ ನೀಡಬೇಕು. ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಲ್ಲಿ ಹೆಚ್ಚುವರಿ ಸಿಬ್ಬಂದಿಗಳನ್ನು ಹೊಸ ಜಿಲ್ಲಾಸ್ಪತ್ರೆಗೆ ನಿಯೋಜಿಸಿಕೊಳ್ಳುವಂತೆ ತಿಳಿಸಿದರು.


*ಟ್ರಾಮಾ ಸೆಂಟರ್:* ಮೈಸೂರು ಮತ್ತು ಬೆಂಗಳೂರಿನ ನಡುವೆ 10 ಪಥದ ರಸ್ತೆ ನಿರ್ಮಾಣವಾಗುತ್ತಿದ್ದು, ಮೈಸೂರು ಮತ್ತು ಬೆಂಗಳೂರು ಹೊರತುಪಡಿಸಿದರೆ ಮಧ್ಯಭಾಗದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇರುವುದಿಲ್ಲ. ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಹಾಗೂ ಟ್ರಾಮಾ ಸೆಂಟರ್ ಗಾಗಿ ಬೇಕಿರುವ ಕಟ್ಟಡದ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಇಲ್ಲಿಗೆ ತಜ್ಞ ವೈದ್ಯರನ್ನು ನೇಮಿಸುವ ಬಗ್ಗೆ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿದರು.


*ತಾಲ್ಲೂಕು ಆಸ್ಪತ್ರೆಗಳು ಮೇಲ್ದರ್ಜೆಗೆ:* ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕಿನಲ್ಲಿ 50 ಹಾಸಿಗೆಯುಳ್ಳ ಆಸ್ಪತ್ರೆಗಳಿದ್ದು, ಈ ಆಸ್ಪತ್ರೆಗಳನ್ನು 100 ಹಾಸಿಗೆಗೆ ಉನ್ನತೀಕರಿಸಿಕೊಡಲು ಆರೋಗ್ಯ ಇಲಾಖೆಯ ಕೇಂದ್ರ ಕಚೇರಿಗೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

 

*ಮಾವು ಸಂಸ್ಕರಣ ಘಟಕ:* ಚನ್ನಪಟ್ಟಣ ತಾಲ್ಲೂಕಿನ ಭೈರಾಪಟ್ಟಣದಲ್ಲಿ  ಪ್ರಾರಂಭವಾಗುವ ಮಾವು ಸೇರಿದಂತೆ ವಿವಿಧ ಹಣ್ಣುಗಳ ಸಂಸ್ಕರಣ ಘಟಕದ ಮಾಸ್ಟರ್ ಪ್ಲಾನ್ ಅನ್ನು ಸಿದ್ಧಪಡಿಸಲಾಗಿದೆ.  ಆಡಳಿತ ವಿಭಾಗ, ತರಬೇತಿ ಕೇಂದ್ರ, ವಸ್ತು ಪ್ರದರ್ಶನ ಹಾಗೂ ಮಾರಾಟ ಕೇಂದ್ರ, ಲೋಕಲ್ ಹಾಗೂ ಎಕ್ಸ್ಪೋರ್ಟ್ ಪ್ಯಾಕ್ ಹೌಸ್, ಹಣ್ಣು ಮಾಗಿಸುವ ಚೇಂಬರ್, ಕೋಲ್ಡ್ ಸ್ಟೋರೇಜ್ ಸೇರಿದಂತೆ ಮಾಸ್ಟರ್ ಪ್ಲಾನ್ ಮಾಡಲಾಗಿದ್ದು, ಎಕ್ಸಪ್ರೆಷನ್ ಆಫ್ ಇಂಟ್ರಸ್ಟ್ ಸಹ ಕರೆಯಲಾಗಿದೆ. 10 ಕೋಟಿ ರೂ.ಗಳನ್ನು ಆರ್.ಕೆ.ವಿ,ಕೆ ರಫ್ತಾರ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಪಡೆಯಲು ಯೋಜಿಸಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕರು ವಿಡಿಯೋ ಸಂವಾದದಲ್ಲಿ ತಿಳಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿಗಳು ಯಾವುದೇ ತೊಂದರೆ ಇದ್ದಲ್ಲಿ ತಮ್ಮ ಗಮನಕ್ಕೆ ತಂದು ಪರಿಹರಿಸಿಕೊಂಡು ಶೀಘ್ರವಾಗಿ ಮಾವು ಸಂಸ್ಕರಣ ಘಟಕದ ಕೆಲಸ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.


*ಹೈಟೆಕ್ ರೇಷ್ಮೆ ಮಾರುಕಟ್ಟೆ:*  ಪೊಲೀಸ್ ತರಬೇತಿ ಕೇಂದ್ರದ ಹತ್ತಿರವಿರುವ ರೇಷ್ಮೆ ತರಬೇತಿ ಸಂಸ್ಥೆಯಲ್ಲಿ ರೇಷ್ಮೆ ಹೈಟೆಕ್ ಮಾರುಕಟ್ಟೆ ನಿರ್ಮಾಣಕ್ಕೆ ಕನ್ಸಲ್ಟೆನ್ಸಿ ಸರ್ವಿಸ್ ಟೆಂಡರ್ ಕರೆಯಲಾಗಿದ್ದು, ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿರುತ್ತದೆ. 75 ಕೋಟಿ ರೂ.ಗಳು ವೆಚ್ಚವಾಗಲಿದ್ದು, ಈಗಾಲೇ ನಬಾರ್ಡ್ ನಿಂದ 35 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ರೇಷ್ಮೆ ಇಲಾಖೆ ನಿರ್ದೇಶಕರು ವಿಡಿಯೋ ಸಂವಾದದಲ್ಲಿ ತಿಳಿಸಿದರು. ಉಪಮುಖ್ಯಮಂತ್ರಿಗಳು ಹಾಲಿ ಇರುವ ರೇಷ್ಮೆ ಮಾರುಕಟ್ಟೆ ಸ್ಥಳ ಚಿಕ್ಕದಾಗಿದ್ದು, ರೇಷ್ಮೆ ಸಂಗ್ರಹಣೆ ಕಷ್ಟಕರವಾಗಿರುತ್ತದೆ. ಬೇಗನೇ ಹೊಸ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ ಕೆಲಸ ಪ್ರಾರಂಭವಾಗಬೇಕು ಕೆಲಸಗಳನ್ನು ಚುರುಕಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.


ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಶಿಧರ್, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ ಅಖ್ತರ್, ತೋಟಗಾರಿಕೆ ಇಲಾಖೆ ನಿರ್ದೇಶಕಿ ಫೌಜಾ  ತಬನಮ್ ಅವರು ವಿಡಿಯೊ ಸಂವಾದದಲ್ಲಿ ಬೆಂಗಳೂರಿನಿಂದ ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑