ರಾಮನಗರ ಮತ್ತು ಚನ್ನಪಟ್ಟಣ ನಗರಸಭಾ ಚುನಾವಣೆ ನಡೆಸಲು ಮುಂಜಾಗ್ರತ ಕ್ರಮ
ನಗರ ಸ್ಥಳಿಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2021 ರ ರಾಮನಗರ ಮತ್ತು ಚನ್ನಪಟ್ಟಣ ನಗರಸಭಾ ವ್ಯಾಪ್ತಿಯಲ್ಲಿ ಏಪ್ರಿಲ್ 27 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಮತದಾನ ಕಾರ್ಯ ನಡೆಯಲಿದ್ದು, ಈ ಸಂಬಂಧ ಜಿಲ್ಲಾಡಳಿತವು ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಚುನಾವಣೆ ನಡೆಸಲು ಸಜ್ಜಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದ್ದಾರೆ.
ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮತಗಟ್ಟೆಗಳಿಗೆ ಅಗತ್ಯ ಸಿದ್ದತೆ ಮತ್ತು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಹಾಗೂ ಮತದಾನ ಕೇಂದ್ರವನ್ನು ಹೈಪೋ ಕ್ಲೋರೈಡ್ ದ್ರಾವಣದಿಂದ ಸಂಪೂರ್ಣ ಸ್ಯಾನಿಟೈಸ್ ಮಾಡಿಸಲಾಗಿರುತ್ತದೆ, ಮತ್ತು ಮತ ಚಲಾಯಿಸಲು ಬರುವ ಮತದಾರರಿಗೆ ಮತಗಟ್ಟೆಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜಿಸಿ ಥರ್ಮಲ್ ಸ್ಕ್ಯಾನರ್ನಿಂದ ತಪಾಸಣೆ ಮಾಡಲು ಹಾಗೂ ಸ್ಯಾನಿಟೈಸರ್ ಬಳಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ರಾಮನಗರ ಮತ್ತು ಚನ್ನಪಟ್ಟಣ ನಗರಸಭಾ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕಿತ ರೋಗಿಗಳು (ರಾಮನಗರ-55 ಮತ್ತು ಚನ್ನಪಟ್ಟಣ- 56) ಇದ್ದು, ಸದರಿಯವರಿಗೆ ಪಿ.ಪಿ.ಕಿಟ್ ಬಳಸಿ ಸಂಜೆ ಸಮಯ 5 ಗಂಟೆಯಿಂದ 6 ಗಂಟೆವರೆಗೆ ಮತ ಚಲಾಯಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಗುಂಪುಗೂಡದೆ ಸಾಮಾಜಿಕ ಅಂತರ ಕಾಯ್ದುಕೊಂಡು ಸಾಲಿನಲ್ಲಿ ನಿಂತು ನಿರ್ಭೀತಿಯಿಂದ ಮುಕ್ತವಾಗಿ ಮತ ಚಲಾಯಿಸುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು