ಕೊರೊನಾ ಸಮಯದಲ್ಲಿ ರಕ್ತದ ಕೊರತೆಯಾಗಬಾರದು. ವ್ಯಾಕ್ಸಿನೇಷನ್ ಗೆ ಮೊದಲು ರಕ್ತದಾನ ಮಾಡಿ ಸಚಿವ ಸಿ ಪಿ ಯೋಗೇಶ್ವರ್
ಕೊರೊನಾ ಸಮಯದಲ್ಲಿ ಯೋಧರು ಸೇರಿದಂತೆ ಅಗತ್ಯವಿರುವ ರೋಗಿಗಳಿಗೆ ರಕ್ತದ ಕೊರತೆಯಾಗಬಾರದು. ಈ ನಿಟ್ಟಿನಲ್ಲಿ ಸರ್ವರೂ ಪಾಲ್ಗೊಂಡು ರಕ್ತದಾನ ಮಾಡಬೇಕು ಎಂದು ಪ್ರವಾಸೋದ್ಯಮ ಮತ್ತು ಜೀವಿಶಾಸ್ತ್ರ ಸಚಿವ ಸಿ ಪಿ ಯೋಗೇಶ್ವರ್ ಕೋರಿದರು. ಅವರು ಇಂದು ನಗರದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಯಂ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.
ಕೊರೊನಾ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಷಿನ್ ಹಾಕಿಸಿಕೊಂಡ ನಂತರ ಕನಿಷ್ಠ ಒಂದು ತಿಂಗಳಿಂದ ಎರಡು ತಿಂಗಳ ಕಾಲ ರಕ್ತದಾನ ಮಾಡುವಂತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ಲಸಿಕೆ ಹಾಕಿಸಿಕೊಳ್ಳುವ ಮುಂಚೆಯೇ ಇನ್ನೂ ಲಸಿಕೆ ಹಾಕಿಸಿಕೊಳ್ಳದೇ ಇರುವವರು ಬಂದು ಸ್ವಯಂ ರಕ್ತದಾನ ಮಾಡಿ ಎಂದು ಅವರು ಕರೆ ನೀಡಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿಶ್ವ ಹಿಂದೂ ಪರಿಷದ್, ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಯೋಗೇಶ್ವರ್ ಅಭಿಮಾನಿಗಳು ಒಗ್ಗೂಡಿ ಸ್ವಯಂ ರಕ್ತದಾನ ಶಿಬಿರ ಏರ್ಪಡಿಸಿದ್ದು, ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ರಕ್ತದಾನ ಮಾಡಬಹುದು. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ರಕ್ತದಾನ ಮಾಡಬೇಕೆಂದು ಅವರು ತಿಳಿಸಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿಶ್ವ ಹಿಂದೂ ಪರಿಷದ್, ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ತಾಲ್ಲೂಕಿನ ಯೋಗೇಶ್ವರ್ ಅಭಿಮಾನಿಗಳು ಸಡಗರ ಮತ್ತು ರಾಷ್ಟ್ರಾಭಿಮಾನದಿಂದ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು.
ಶಿಬಿರದಲ್ಲಿ ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್ ಎನ್ ಮಲವೇಗೌಡ. ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು, ತಾಲ್ಲೂಕು ಅಧ್ಯಕ್ಷ ಕೆ ಟಿ ಜಯರಾಮು, ನಗರ ಘಟಕದ ಅಧ್ಯಕ್ಷ ಶಿವಕುಮಾರ್, ನಗರ ಮಹಿಳಾ ಘಟಕದ ಅಧ್ಯಕ್ಷೆ ಮೈತ್ರಿಗೌಡ ಮತ್ತು ಎಲ್ಲಾ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು