Tel: 7676775624 | Mail: info@yellowandred.in

Language: EN KAN

    Follow us :


ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯ: ನ್ಯಾ. ಅನಿತಾ ಎನ್.ಪಿ

Posted date: 11 Oct, 2023

Powered by:     Yellow and Red

ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯ: ನ್ಯಾ. ಅನಿತಾ ಎನ್.ಪಿ

ರಾಮನಗರ, ಅ. 11:   ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಅನಿತಾ ಎನ್.ಪಿ ಅವರು ತಿಳಿಸಿದರು.


ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಗಳ ವಿಭಾಗದ ಸಹಯೋಗದೊಂದಿಗೆ ಪೊಲೀಸ್ ಭವನದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಜೀವನ ಶೈಲಿಯನ್ನು ಸಮತೋಲನವಾಗಿ ನಿರ್ವಹಿಸುವುದನ್ನು ರೂಡಿಸಿಕೊಳ್ಳಬೇಕು. ಒಳ್ಳೆಯ ಆರೋಗ್ಯ ಶೈಲಿಯನ್ನು ಕಾಪಾಡಿಕೊಳ್ಳಲು ಒತ್ತಡಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಮಾಡಬೇಕಾದ ಕೆಲಸಗಳನ್ನು ಮಾಡಬೇಕಾದ ಸಮಯದಲ್ಲೇ ಮಾಡಿ ಮುಗಿಸಬೇಕು ಇದರಿಂದಾಗಿ ಒತ್ತಡಗಳು ಕಡಿಮೆಯಾಗುತ್ತದೆ ಎಂದು ತಿಳಿಸಿದರು.


ಸಮಸ್ಯೆಗಳನ್ನು ಅತಿಯಾಗಿ ಮನಸ್ಸಿಗೆ ತೆಗೆದುಕೊಳ್ಳದೇ ಸರಿಯಾಗಿ ನಿಭಾಯಿಸಿದಾಗ ಮಾತ್ರ ಮಾನಸಿಕ ಕಾಯಿಲೆಯಿಂದ ದೂರ ಉಳಿಯಬಹುದು. ದೇಹಕ್ಕೆ ಮಾತ್ರವಲ್ಲದೇ ಮನಸ್ಸಿಗೂ ಚಿಕಿತ್ಸೆಯ ಅವಶ್ಯಕತೆ ಇದೆ ಎಂದರು.


ಅಪರ ಪೊಲೀಸ್ ಅಧೀಕ್ಷಕರಾದ ಸುರೇಶ್ ಟಿ.ವಿ ಅವರು ಮಾತನಾಡಿ, ಎಲ್ಲಾ ಸಮಯ ಸಂದರ್ಭದಲ್ಲಿ ನೆಮ್ಮದಿಯಿಂದ ಇರುತ್ತಾ, ಎಲ್ಲರೊಡನೆ ಹೊಂದಾಣಿಕೆಯಿಂದ ಬದುಕುತ್ತಾ, ಸ್ವಾವಲಂಬಿಯಾಗಿ, ಸಂತೋಷವಾಗಿ, ತೃಪ್ತಿಕರವಾಗಿರುವುದೇ ಮಾನಸಿಕ ಆರೋಗ್ಯ ಎಂದರು.


ದೇಹ ಮತ್ತು ಮನಸ್ಸು ಒಂದೇ ನಾಣ್ಯದ ಎರಡು ಮುಖಗಳು ಒಂದಕ್ಕೆ ತೊಂದರೆಯಾದರೆ ಮತ್ತೊಂದಕ್ಕೆ ತೊಂದರೆಯಾಗಬಹುದು. ದೈಹಿಕ ಖಾಯಿಲೆ ಮಾನಸಿಕ ನೆಮ್ಮದಿಯನ್ನು ಕೆಡಿಸಿದರೆ, ಮಾನಸಿಕ ಸಮಸ್ಯೆ ದೇಹದ ಆರೋಗ್ಯವನ್ನು ಕೆಡಿಸಬಲ್ಲದು. ಮಾನಸಿಕ ಒತ್ತಡಕ್ಕೆ ಪರಿಹಾರಗಳು ಜೀವನಶೈಲಿಯಲ್ಲಿ ಸೂಕ್ತ ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ಚಿಂತೆ ಮಾಡುವುದನ್ನು ಬಿಟ್ಟು ಕಾರ್ಯೋನ್ಮುಖವಾಗಬೇಕಾಗುತ್ತದೆ ಎಂದು ತಿಳಿಸಿದರು.


ಪೊಲೀಸ್ ಸಿಬ್ಬಂದಿಗಳು ಹೆಚ್ಚು ಒತ್ತಡದಿಂದ ಪ್ರತಿನಿತ್ಯ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ಇರುವುದಿಲ್ಲ. ಈ ಸಂದರ್ಭದಲ್ಲಿ ಠಾಣೆಗೆ ಹಾಜರಾಗುವ ಹಿರಿಯರಿಗೆ, ಹೆಣ್ಣು ಮಕ್ಕಳಿಗೆ, ಶೋಶಿತರಿಗೆ ಪೊಲೀಸ್ ಸಿಬ್ಬಂದಿಗಳು ದರ್ಪವನ್ನು ತೋರದೆ ಅವರಿಗೆ ಮಾನಸಿಕವಾಗಿ ಧೈರ್ಯವನ್ನು ತುಂಬಿ ನ್ಯಾಯವನ್ನು ಒದಗಿಸುವಂತಹ ಕೆಲಸಗಳನ್ನು ಮಾಡುವಂತೆ ತಿಳಿಸಿದರು.


ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳಾದ ಡಾ. ಮಂಜುನಾಥ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2023ರ ಕುರಿತು ಕರಪತ್ರ ಬಿಡುಗಡೆ ಮಾಡಿದರು.


ಮಾನಸಿಕ ಆರೋಗ್ಯ ವಿಭಾಗದ ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತರಾದ ಪದ್ಮರೇಖಾ ಅವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಕುಮಾರ್, ಜಿಲ್ಲಾ ರೋಗವಾಹಕ ಆಶ್ರಿಕ ರೋಗಗಳ ನಿಯಂತ್ರಣಾಧಿಕಾರಿ ಡಾ. ಶಶಿಧರ್ ಎಂ.ಎನ್., ರಾಮನಗರ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಉಮಾ, ಮಾನಸಿಕ ಆರೋಗ್ಯ ವಿಭಾಗದ ಮನೋರೋಗ ತಜ್ಞರಾದ ಡಾ. ಆದರ್ಶ, ಪೊಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑