ತಾಲ್ಲೂಕು ಆಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ ರೈತ ಸಂಘದ ವಿಭಾಗೀಯ ಅಧ್ಯಕ್ಷ ಮಲ್ಲಯ್ಯ
ಚನ್ನಪಟ್ಟಣ: ತಾಲ್ಲೂಕು ಆಡಳಿತ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ, ಇಡೀ ತಾಲ್ಲೂಕನ್ನು ನಿಯಂತ್ರಿಸಬೇಕಾದ ದಂಡಾಧಿಕಾರಿಗಳು ತೆಪ್ಪಗಿದ್ದಾರೆ. ಇದಕ್ಕೆ ಇತ್ತೀಚೆಗೆ ನಡೆದ ತಾಲೂಕಿನ ಟಿಎಪಿಸಿಎಂಎಸ್ ಹಗರಣವೇ ಸಾಕ್ಷಿಯಾಗಿದೆ. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಲ್ಲಿ ನಡೆದಿರುವ ಅಕ್ಕಿ ನಾಪತ್ತೆ ಹಗರಣದ ಜೊತೆಗೆ ಕಂದಾಯ ಇಲಾಖೆ, ನೋಂದಣಿ ಇಲಾಖೆ, ರೇಷ್ಮೆ, ಸಮಾಜ ಕಲ್ಯಾಣ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಮೂಲಾಗ್ರ ತನಿಖೆ ನಡೆಸಬೇಕು, ಆರೋಪ ಹೊತ್ತವರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವಿಭಾಗೀಯ ಅಧ್ಯಕ್ಷ ಮಲ್ಲಯ್ಯ ಆಗ್ರಹಿಸಿದರು. ಅವರು ತಾಲೂಕು ಘಟಕದಿಂದ ನಗರದ ತಾಲೂಕು ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದರು.
ನಗರದ ತಾಲೂಕು ಕಚೇರಿ ಮುಂದೆ ಜಮಾಯಿಸಿದ ರೈತ ಸಂಘದ ಹಲವಾರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ತಾಲೂಕಿನ ಬಹುತೇಕ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಇಲಾಖೆಗಳಲ್ಲಿ ನಡೆದಿರುವ ಹಗರಣಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಎಫ್ಐಆರ್ ಆಗಿರುವ ಅಧಿಕಾರಿಗಳನ್ನು, ತನಿಖೆಗೊಳಪಡಿಸಿ ವಜಾ ಮಾಡಬೇಕು. ಇದೇ ತಾಲ್ಲೂಕಿನ ಜೊತೆಗೆ ಒಂದೇ ಇಲಾಖೆಯಲ್ಲಿ ಮೂರು ವರ್ಷಗಳು ತುಂಬಿದ ಸಿಬ್ಬಂದಿಗಳನ್ನು ಮುಲಾಜಿಲ್ಲದೆ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.
ತಾಲೂಕಿನ ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರವೆಂಬುದು ಮಿತಿಮೀರಿದೆ. ಕಂದಾಯ ಇಲಾಖೆಯಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ 8ಮಂದಿ ಕಂದಾಯ ಇಲಾಖೆ ಸಿಬ್ಬಂದಿ ಪ್ರಕರಣ ಎದುರಿಸುತ್ತಿದ್ದಾರೆ. ರೇಷ್ಮೆ ಇಲಾಖೆಯ ಸಿಬ್ಬಂದಿ ಲಂಚ ಪಡೆದ ಆಪಾದನೆಯ ಮೇಲೆ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ. ನೋಂದಣಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ಎಫ್ಐಆರ್ ದಾಖಲಾಗಿದೆ. ಗಣಿ ಇಲಾಖೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಇಂಥ ಹೊತ್ತಿನಲ್ಲೇ ಬಡ ಕುಟುಂಬಗಳಿಗೆ ಪೂರೈಕೆ ಮಾಡುವ ಅಕ್ಕಿಯಲ್ಲೂ ಅವ್ಯವಹಾರ ಮಾಡಲಾಗಿದೆ. ಸುಮಾರು 1600 ಕ್ವಿಂಟಾಲ್ ಅಕ್ಕಿ ಹಾಗೂ ರಾಗಿ ಟಿಎಪಿಎಂಎಸ್ ಗೋದಾಮಿನಿಂದ ಕಾಣೆಯಾಗಿರುವುದು ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಬಹುತೇಕ ಈ ಎಲ್ಲಾ ಅಧಿಕಾರಿಗಳು ಈಗಲೂ ಕೆಲಸ ನಿರ್ವಹಿಸುತ್ತಿರುವುದು ತಾಲ್ಲೂಕು ಆಡಳಿತ ನಿಷ್ಕ್ರಿಯವಾಗಿದೆ ಎಂಬುದಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನಗರದ ಹೃದಯ ಭಾಗದಲ್ಲಿರುವ, ಆಡಳಿತ ಮಂಡಳಿಯೂ ಇರುವ ಟಿಎಪಿಸಿಎಂಎಸ್ ಗೋದಾಮಿನಿಂದ ಸುಮಾರು 3200 ಚೀಲಗಳಲ್ಲಿದ್ದ ಅಂದಾಜು 52ಲಕ್ಷ ರೂ. ಮೌಲ್ಯದ 1600 ಕ್ವಿಂಟಾಲ್ ಅಕ್ಕಿ ಹಾಗೂ ರಾಗಿ ನಾಪತ್ತೆಯಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಈ ಹಗರಣದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ, ಎಷ್ಟೇ ಪ್ರಭಾವಿ ಆಗಿದ್ದರುಊ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಬೇಕು. ತಾಲೂಕು ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಾರ್ವಜನಿಕರು ಹಾಗೂ ಸರ್ಕಾರದ ಆಸ್ತಿಗಳು ಎಗ್ಗಿಲ್ಲದೇ ಲೂಟಿಯಾಗುತ್ತಿದೆ. ತಾಲೂಕಿನಲ್ಲಿ ಭ್ರಷ್ಟಾಚಾರವೆಂಬುದು ಮುಗಿಲುಮುಟ್ಟಿದ್ದು, ಸರ್ಕಾರ ಈ ಕೂಡಲೇ ತಾಲೂಕಿನಲ್ಲಿ ನಡೆದಿರುವ ಹಗರಣಗಳ ಕುರಿತು ನ್ಯಾಯಾಂಗ ತನಿಖೆ ಕೈಗೊಳ್ಳಬೇಕು. ಮಾಜಿ ಮುಖ್ಯಮಂತ್ರಿ ಹಾಲಿ ಕ್ಷೇತ್ರದ ಶಾಸಕರಾದ ಕುಮಾರಸ್ವಾಮಿ ಯವರು ತನಿಖೆಗೆ ಒತ್ತಾಯಿಸಬೇಕು ಎಂದು ಆಗ್ರಹಿಸಿದರು.
ತಾಲೂಕಿನ ವಿವಿಧ ಇಲಾಖೆಗಳಲ್ಲಿ ಸಾಕಷ್ಟು ವರ್ಷಗಳಿಂದ ಬೀಡುಬಿಟ್ಟಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು. ಹಳಿತಪ್ಪಿರುವ ತಾಲೂಕು ಆಡಳಿತವನ್ನು ಸರಿದಾರಿಗೆ ತಂದು ರೈತರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಹಗರಣಗಳ ತನಿಖೆಗೆ ಒತ್ತಾಯಿಸಿ ತಹಸೀಲ್ದಾರ್ ಮಹೇಂದ್ರ ರವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಕೆ.ಮಲ್ಲಯ್ಯ, ಜಿಲ್ಲಾಧ್ಯಕ್ಷ ತಿಮ್ಮೇಗೌಡ, ಜಿಲ್ಲಾ ಗೌರವಾಧ್ಯಕ್ಷ ಕೃಷ್ಣಯ್ಯ, ಜಿಲ್ಲಾ ಉಪಾಧ್ಯಕ್ಷ ಕೆ.ಎನ್.ರಾಜು, ತಾಲೂಕು ಅಧ್ಯಕ್ಷ ರಾಮೇಗೌಡ, ರವಿಕುಮಾರ್, ಗೋಪಾಲ್, ರವಿ ಮುಂತಾದವರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು