ಗೌಡಗೆರೆ ಚಾಮುಂಡೇಶ್ವರಿ ಬಸವಪ್ಪ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
ಚನ್ನಪಟ್ಟಣ; ತಾಲೂಕಿನ ಗೌಡಗೆರೆ ಗ್ರಾಮದ ಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಧರ್ಮದರ್ಶಿ ಡಾ ಮಲ್ಲೇಶ್ ಗುರೂಜಿ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.
ಕ್ಷೇತ್ರದ ಪವಾಡ ಬಸಪ್ಪನವರ ಮೂರನೇ ವರ್ಷದ ಹುಟ್ಟುಹಬ್ಬ ಹಾಗೂ ಕಾರ್ತಿಕ ಮಾಸದ ಅಮಾವಾಸ್ಯೆ ಪ್ರಯುಕ್ತ ನಡೆದ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಸಾವಿರಾರು ಭಕ್ತಸಮೂಹ ಹರಿದುಬಂದಿತ್ತು. ಈ ಮೂಲಕ ಸಹಸ್ರಾರು ಮಂದಿ ಭಕ್ತಾಧಿಗಳು ಅದ್ದೂರಿ ಲಕ್ಷ ದೀಪೋತ್ಸವವನ್ನು ಕಣ್ತುಂಬಿಕೊಂಡರು.
ಲಕ್ಷ ದೀಪೋತ್ಸವ ಕಾರ್ಯಕ್ರಮದ ಪ್ರಯುಕ್ತ ಮಂಗಳವಾರ ಮುಂಜಾನೆಯಿಂದಲೇ ತಾಯಿಯ ಸನ್ನಿದ್ಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಚಾಮುಂಡೇಶ್ವರಿ ತಾಯಿಗೆ ಅಭಿಷೇಕ, ವಿಶೇಷ ಅಲಂಕಾರ, ತಾಯಿಯ ಮೆರವಣಿಗೆ, ಪವಾಡ ಬಸವಪ್ಪನ ಗದ್ದುಗೆಗೆ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಕ್ಷೇತ್ರದ ಪವಾಡ ಬಸವಪ್ಪನವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಭಕ್ತಾಧಿಗಳು ಬಸವಪ್ಪನ ಮುಂಭಾಗ ೫೯ ಕೆ.ಜಿ. ತೂಕದ ಕೇಕನ್ನು ಕತ್ತರಿಸಿ ಸಂಭ್ರಮಪಟ್ಟರು. ತದನಂತರ, ಬಸವಪ್ಪನಿಗೆ ಹೂವಿನ ಅಭಿಷೇಕ ಮಾಡಿ ಶುಭಾಶಯ ಕೋರಿದರು.
ಸಂಜೆ ನಡೆದ ದೀಪೋತ್ಸವ ಕಾರ್ಯಕ್ರಮಕ್ಕೆ ದಕ್ಷಿಣ ವಲಯ ಐಜಿ ಡಾ.ಬೋರಲಿಂಗಯ್ಯ ಹಾಗೂ ಕ್ಷೇತ್ರದ ಧರ್ಮದರ್ಶಿ ಡಾ. ಮಲ್ಲೇಶ್ ಗುರೂಜೀ ಚಾಲನೆ ನೀಡಿದರು. ಸಾವಿರಾರು ಭಕ್ತಾಧಿಗಳು ದೀಪೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಭೂತರಾದರು. ದೇಗುಲ ಆವರಣದಲ್ಲಿ ಇಟ್ಟಿದ್ದ ದೀಪಗಳಿಗೆ ಎಣ್ಣೆ ಬತ್ತಿ ಹಾಕಿ ದೀಪ ಹಚ್ಚುವ ಮೂಲಕ ಭಕ್ತಾಧಿಗಳು ತಾಯಿಯ ಕೃಪೆಗೆ ಪಾತ್ರರಾದರು.
*ಹರಿದು ಬಂದ ಭಕ್ತಸಾಗರ!*
ಕ್ಷೇತ್ರದಲ್ಲಿ ಪ್ರತಿವರ್ಷವೂ ಕಾರ್ತಿಕ ಮಾಸದಲ್ಲಿ ದೀಪೋತ್ಸವ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಈ ಬಾರಿಯ ಲಕ್ಷ ದೀಪೋತ್ಸವಕ್ಕೆ ಭಕ್ತಸಾಗರ ಕ್ಷೇತ್ರದತ್ತ ಹರಿದುಬಂದಿದ್ದು ವಿಶೇಷವಾಗಿತ್ತು. ತಾಲೂಕು, ಜಿಲ್ಲೆಯಷ್ಟೇ ಅಲ್ಲದೇ ರಾಜ್ಯದ ನಾನಾ ಭಾಗಗಳ ಭಕ್ತಾಧಿಗಳು ದೀಪೋತ್ಸವವನ್ನು ಕಣ್ತುಂಬಿಕೊಂಡರು. ಜಿಲ್ಲೆಯ ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು, ಹಿರಿ ಹಾಗೂ ಕಿರುತೆರೆ ಕಲಾವಿದರು ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಮುಖಂಡರು ಹಾಗೂ ರಾಜಕೀಯ ಧುರೀಣರು ದೀಪೋತ್ಸವಕ್ಕೆ ಸಾಕ್ಷಿಯಾದರು.
ಜಗಮಗಿಸಿದ ಶ್ರೀ ಕ್ಷೇತ್ರ!
ಕ್ಷೇತ್ರದಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮಕ್ಕೆ ಕ್ಷೇತ್ರದ ಧರ್ಮದರ್ಶಿ ಡಾ.ಮಲ್ಲೇಶ್ ಗುರೂಜೀ ನೇತೃತ್ವದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಮುಂಜಾನೆಯಿಂದ ರಾತ್ರಿವರೆಗೂ ನಿರಂತರ ಅನ್ನದಾಸೋಹ ಹಮ್ಮಿಕೊಳ್ಳಲಾಗಿತ್ತು. ದೀಪೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ವಿದ್ಯುತ್ ದೀಪಗಳಿಂದ ಜಗಮಗಿಸಿತ್ತು. ದೀಪೋತ್ಸವ ಆರಂಭಗೊಳ್ಳುತ್ತಿದಂತೆ, ತಾಯಿಯ ಪಂಚಲೋಹ ವಿಗ್ರಹದ ಹಿಂಭಾಗದಲ್ಲಿ ಸಿಡಿದ ಬಾಣ ಬಿರುಸುಗಳು ಕಾರ್ಯಕ್ರಮದ ಕಳೆ ಹೆಚ್ಚಿಸಿದವು. ಎಂ.ಕೆ.ದೊಡ್ಡಿ ಪೊಲೀಸರಿಂದ ಬಿಗಿಬಂದೋಬಸ್ತ್ ಏರ್ಪಡಿಸಲಾಗಿತ್ತು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು